ನಾಳೆ ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ – ಸಚಿವ ಅಂಗಾರ ಅವರಿಂದ ಶಿಲಾನ್ಯಾಸ…

ಸುಳ್ಯ: ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಜು.3ರಂದು ಪೂ.9.30ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಅಂಬೆಟಡ್ಕ ಕನ್ನಡ ಭವನದ ಬಳಿಯಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ತಾಲೂಕು ಪಂಚಾಯತ್ ನೀಡಿದ ಸ್ಥಳದಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣವಾಗಲಿದೆ.
ಸರಕಾರದ ಅನುದಾನ ಮತ್ತು ದಾನಿಗಳ ನೆರವಿನಿಂದ ಎರಡು ಮಹಡಿಯ ಸುಸಜ್ಜಿತ ಪತ್ರಿಕಾ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಿಲಾನ್ಯಾಸ ನೆರವೇರಿಸಲಿದ್ದಾರೆ.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಿಕಾಭವನಕ್ಕೆ ನಿವೇಶನ ಒದಗಿಸಲು ಸಹಕಾರ ನೀಡಿದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಹಾಗು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ಅವರನ್ನು ಗೌರವಿಸಲಾಗುವುದು.
ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಹಶೀಲ್ದಾರ್ ಅನಿತಾಲಕ್ಷ್ಮಿ, ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಹಿರಿಯ ಪತ್ರಕರ್ತ ಡಾ.ಯು.ಪಿ.ಶಿವಾನಂದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಕಾರ್ಮಿಕ ಮುಖಂಡ ಕೆ.ಪಿ.ಜಾನಿ ಕಲ್ಲುಗುಂಡಿ, ಕೆ.ಎಂ.ಮುಸ್ತಫ, ನಾರಾಯಣ ಕೇಕಡ್ಕ, ದಿನೇಶ್ ಮಡಪ್ಪಾಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ.

Sponsors

Related Articles

Back to top button