ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಕೀರ್ತಿರಾಜ್ ಪೂಜಾರಿ ಅವರಿಗೆ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್ ಪೂಜಾರಿ ಕಾನ ಇವರು ರಾಜ್ಯಮಟ್ಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಅತ್ಲೆಟಿಕ್ ಅಸೋಸಿಯೇಶನ್ನ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಥಮ ರಾಷ್ಟ್ರೀಯ ಜಾವೆಲಿನ್ ದಿನದ ಅಂಗವಾಗಿ ನಡೆದ ಈ ಸ್ಪರ್ಧೆಯಲ್ಲಿ 23 ವರ್ಷ ವಯೋಮಿತಿಯ ವಿಭಾಗದಲ್ಲಿ ಇವರು ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದ್ದಾರೆ.
ಒಲಿಂಪಿಕ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದ ಸವಿನೆನಪಿಗಾಗಿ ರಾಷ್ಟ್ರೀಯ ಜಾವೆಲಿನ್ ದಿನವನ್ನು ಆಚರಿಸಲಾಗುತ್ತದೆ.
ಕೀರ್ತಿರಾಜ್ ಅವರು ಇತ್ತೀಚಿಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಜಾವೆಲಿನ್ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಇವರು ನಿಡ್ಪಳ್ಳಿ ಗ್ರಾಮದ ಸಂಜೀವ ಪೂಜಾರಿ ಕಾನ ಮತ್ತು ಜಯಂತಿ ದಂಪತಿಯ ಪುತ್ರರಾಗಿದ್ದಾರೆ. ಕೀರ್ತಿರಾಜ್ ಪೂಜಾರಿ ಅವರ ಈ ಸಾಧನೆಗೆ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಅಭಿನಂದನೆ ಸಲ್ಲಿಸಿದ್ದಾರೆ.