ಡಿ.ಕೆ.ಶಿವಕುಮಾರ್ ಅವರಿಗೆ ಇ.ಡಿ.ಸಮನ್ಸ್ ರಾಜಕೀಯ ಪ್ರೇರಿತ – ಶೌವಾದ್ ಗೂನಡ್ಕ…

ಮಂಗಳೂರು: ಕರ್ನಾಟಕದಲ್ಲಿ ಭಾರತ್ ಜೋಡೋ ಕಾರ್ಯಕ್ರಮದ ಸಿದ್ದತೆ ಹಾಗೂ ರಾಜ್ಯ ವಿಧಾನಮಂಡಲ ಅಧಿವೇಶನದ ನಡುವೆ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಇ.ಡಿ.ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದ್ದು, ಬಿ.ಜೆ.ಪಿ.ಯು ದ್ವೇಷದ ರಾಜಕಾರಣದ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಹೊರಟಿದೆ, ಇದಾವುದಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಜಗ್ಗುವುದಿಲ್ಲವೆಂದು ಕೆ.ಪಿ.ಸಿ.ಸಿ.ವಕ್ತಾರರಾದ ಶೌವಾದ್ ಗೂನಡ್ಕರವರು ಹೇಳಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿ.ಜೆ.ಪಿ.ಗೆ ಸೋಲುವ ಮುನ್ಸೂಚನೆ ಸಿಕ್ಕಿದ್ದು, ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲಾಗದೆ ತನಿಖಾ ಸಂಸ್ಥೆಗಳ ಮೂಲಕ ಪಕ್ಷದ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ಸಂಘಟನಾತ್ಮಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ತುಂಬುತ್ತಿರುವ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಬಿ.ಜೆ.ಪಿ.ಯು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಕುಗ್ಗಿಸುವ ತಂತ್ರವೇ ಹೊರತು ಇನ್ನಾವುದು ಅಲ್ಲ, ಬಿ.ಜೆ.ಪಿ.ಯು ಇಂತಹ ಕೀಳು ಮಟ್ಟದ ರಾಜಕೀಯದ ಮೂಲಕ ಪ್ರತಿಪಕ್ಷಗಳನ್ನು ಮಟ್ಟ ಹಾಕಲು ಹೊರಟಿದ್ದು, ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದವರು ತಿಳಿಸಿದ್ದಾರೆ.