ಶಿಕ್ಷಣ ಮತ್ತು ಸಂಸ್ಕಾರದಿಂದ ಯಶಸ್ಸಿನ ಗುರಿ ತಲುಪಲು ಸಾಧ್ಯ -ಸಂತೋಷ್ ಕುಲಾಲ್ ನೆತ್ತರಕೆರೆ…

ಬಂಟ್ವಾಳ :ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ರೂಡಿಸಿಕೊಂಡಲ್ಲಿ ಯಶಸ್ಸಿನ ಗುರಿ ತಲುಪಲು ಸಾಧ್ಯ. ಬಾಲ್ಯದಲ್ಲಿಯೇ ಸದ್ವಿಚಾರ ಹಾಗೂ ಸದ್ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿ, ಎಂದು ಕೋಸ್ಟಲ್ ಬುಲೆಟಿನ್ ಸುದ್ದಿ ಮಾಧ್ಯಮದ ಪ್ರವರ್ತಕ ಸಂತೋಷ್ ಕುಲಾಲ್ ನೆತ್ತರಕೆರೆ ಹೇಳಿದರು.
ಅವರು ತುಂಬೆ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಳೇ ವಿದ್ಯಾರ್ಥಿಗಳ ನೆರವಿನೊಂದಿಗೆ ನಿರ್ಮಾಣವಾದ ಬಿಸಿಯೂಟ ಸೇವನೆಯ ಉಪಹಾರ ಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಬ್ದುಲ್ ಸಲಾಂ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಸಿಗುವ ಸೌಲಭ್ಯ ಹಾಗೂ ಅವಕಾಶಗಳನ್ನು ಸದ್ಭಳಕೆ ಮಾಡಿ ಉತ್ತಮ ವಿದ್ಯಾರ್ಥಿಗಳಾಗಿ ಶಾಲೆಗೆ ಹಾಗೂ ಸಮಾಜಕ್ಕೆ ಹೆಸರು ತನ್ನಿ ಎಂದು ಹೇಳಿದರು.
ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ ಕೆದಿಲ ಶಾಲಾ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಕೆ ಎನ್ ಗಂಗಾಧರ ಆಳ್ವ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು, ತುಂಬೆ ವಿದ್ಯಾಸಂಸ್ಥೆಗಳ ಮ್ಯಾನೇಜರ್ ಅಬ್ದುಲ್ ಕಬೀರ್ ಬಿ ಧನ್ಯವಾದವಿತ್ತು, ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ.ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಹಾಗೂ ಅಶೋಕ್ ಸಹಕರಿಸಿದರು.