ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿಗೆ ಶಿಕ್ಷಕ ಜಯಾನಂದ ಪೆರಾಜೆ ಆಯ್ಕೆ…

ಬಂಟ್ವಾಳ:ಶಿಕ್ಷಣ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನಿರಂತರ ಸೇವೆ ಸುತ್ತಿರುವ ಜಯಾನಂದ ಪೆರಾಜೆಯವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘವು ನೀಡುವ ರಾಷ್ಟ್ರೀಯ ಪ್ರಶಸ್ತಿ ಶಿಕ್ಷಣ ಸೌರಭ 2025 ಕ್ಕೆ ಶಿಕ್ಷಕ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ್ ಲಂಬಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಕ್ಷಕರಾಗಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿರುವ ಇವರನ್ನು ರಾಜ್ಯ ಸಮಿತಿಯಲ್ಲಿ ಆಯ್ಕೆ ಮಾಡಿದೆ.
ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಮಾ. 16 ರಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.
ಜಯಾನಂದ ಪೆರಾಜೆಯವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಲ್ಲಿ 34 ವರ್ಷ ಕನ್ನಡ ಭಾಷಾ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ, ನಾಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವ ಮೂಲಕ ಅತ್ಯುತ್ತಮ ಶಿಕ್ಷಕರಾಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಪಾತ್ರರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರು ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬಂಟ್ವಾಳ ಎಸ್.ವಿ.ಎಸ್ ದೇವಳ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಧ್ಯಕ್ಷರಾಗಿ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು , ಬರಹಗಾರ ವೇದಿಕೆಯ ಜಿಲ್ಲಾ ಅಧ್ಯಕ್ಷರಾಗಿ ನಾಯಕತ್ವ ವಹಿಸಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ರಾಜ್ಯಾದ್ಯಂತ ಕನ್ನಡ ಸಾಹಿತಿಗಳ ಸಂಘಟನೆಯಲ್ಲಿ ತೊಡಗಿಸಿಕೊಂಡು ಕ್ರೀಯಾಶೀಲರಾಗಿದ್ದಾರೆ.
ಹಿರಿಯ ಪತ್ರಕರ್ತರಾಗಿರುವ ಇವರು ಕನ್ನಡ ಪಠ್ಯ ಪುಸ್ತಕದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ , ಅಂತರಾಷ್ಟ್ರೀಯ ಜೇಸಿ ಸಂಸ್ಥೆಯ ರಾಜ್ಯ ತರಬೇತುದಾರರಾಗಿ ನೂರಾರು ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನಡೆಸಿಕೊಟ್ಟಿರುತ್ತಾರೆ. ಹಲವಾರು ಸಾಹಿತ್ಯ ಗೋಷ್ಠಿಗಳನ್ನು ಸಂಘಟನೆ ಮಾಡಿರುವುದಲ್ಲದೆ ಕವಿಗೋಷ್ಠಿ ,ವಿಚಾರ ಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಭಾವಬಿಂದು ಕವನ ಸಂಕಲವನ್ನು ಪ್ರಕಟಿಸಿ ಸೃಜನಶೀಲ ಕವಿಯಾಗಿ ಗುರುತಿಸಲ್ಪಟ್ಟಿದ್ದಾರೆ.