ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಗಣರಾಜ್ಯೋತ್ಸವ ಆಚರಣೆ…
ಪುತ್ತೂರು: ಆಧುನಿಕತೆಯ ಭರಾಟೆಯಲ್ಲಿ ಇಂದಿನ ಯುವಜನತೆ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆಯೋ ಎನ್ನುವ ಭೀತಿ ಕಾಡುತ್ತಿದೆ. ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯಿಂದ ಗುರುಹಿರಿಯರಲ್ಲಿ ಭಕ್ತಿ ಗೌರವಗಳು ಕಡಿಮೆಯಾಗುತ್ತಿದ್ದು, ಸ್ವೇಚ್ಚಾಚಾರಗಳು ಹೆಚ್ಚುತ್ತಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತನಾಡಿದರು. ಪ್ರಜೆಗಳಿಗೆ ಸಮಾನ ಅಧಿಕಾರವನ್ನು ನೀಡುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿಯೇ ಅತಿ ಶ್ರೇಷ್ಠವಾದದ್ದು. ಆದರೆ ದೇಶದ ರಾಜಕೀಯ ಮೇಲಾಟಗಳಿಂದ ಈ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಉಂಟಾಗಿದ್ದು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಾವು ಹೆಣಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ಅಖಂಡತೆ ಮತ್ತು ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯುವಜನತೆ ಕಟಿಬದ್ದರಾಗಬೇಕು ಎಂದು ಅವರು ಹೇಳಿದರು.
ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಆಶ್ಲೆ.ಡಿ’ಸೋಜ ದೇಶದ ಸಂವಿಧಾನದ ಆಶಯಗಳು ಮತ್ತು ಅದನ್ನು ಅನುಸರಿಸಬೇಕಾದ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಮತ್ತು ಕಾರ್ಯಕ್ರಮ ಸಂಯೋಜಕ ಬಾಲಚಂದ್ರ ಗೌಡ ಭಾರ್ತಿಕುಮೇರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿದ್ಯಾರ್ಥಿನಿಯರಾದ ದೀಪಶ್ರಿ, ಸನ್ಮಯ, ಅನೂಶಾ, ಆಕಾಂಕ್ಷಾ ಮತ್ತು ಶ್ರೀಮಾ ಪ್ರಾರ್ಥಿಸಿದರು. ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ವಂದಿಸಿದರು. ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.






