ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ: ಟಿ.ಎಂ ಶಾಹಿದ್ ತೆಕ್ಕಿಲ್ ಸಂತಾಪ…

ಮಂಗಳೂರು: ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾಗಿದ್ದಾರೆ.
ಕರ್ನಾಟಕ ಹಾಗೂ ಕೇರಳ ರಾಜ್ಯದ ಅನೇಕ ಜಮಾತ್ಗಳಿಗೆ ಖಾಝಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು, ಧಾರ್ಮಿಕ ಮತ್ತು ಸಾಮಾಜಿಕ ಶಿಕ್ಷಣ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.
ಖಾಝಿಯವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ ಶಾಹೀದ್ ತೆಕ್ಕಿಲ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರ ನಿಧನದ ವಾರ್ತೆ ಅತ್ಯಂತ ಆಘಾತ ತಂದಿದೆ. ಸೌಹಾರ್ದತೆ ಮತ್ತು ಧಾರ್ಮಿಕ ಮಾರ್ಗದರ್ಶನಕ್ಕೆ ಹೆಸರಾಗಿದ್ದ ಅವರ ಅಗಲಿಕೆ ಕೇವಲ ನಮ್ಮ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಆದ ದೊಡ್ಡ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವಲ್ಲಿ ಅವರು ವಹಿಸಿದ್ದ ಪಾತ್ರ ಅನನ್ಯವಾದುದು. ದೇವರು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನಾಡಿನ ಜನರಿಗೆ ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.






