ಸೆ.28 – ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ವಿರುದ್ದ ಕರ್ನಾಟಕ ಬಂದ್…

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ವಿಧೇಯಕಗಳನ್ನು ವಿರೋಧಿಸಿ ರಾಜ್ಯದ ವಿವಿಧ ರೈತಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಸೆ.28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಊಬರ್ ಚಾಲಕರ ಸಂಘ, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆ ಸೇರಿದಂತೆ ಒಟ್ಟ 32 ಸಂಘಟನೆಗಳು ಈ ಬಂದ್ಗೆ ಬೆಂಬಲ ಸೂಚಿಸಿವೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸೆ. 28ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದರು. ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರಿಗೆ ಪೂರಕವಾದಂತ ಕಾಯ್ದೆ ಅಲ್ಲ. ಕಾರ್ಪೋರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡುವಂತ ಕಾಯ್ದೆಯಾಗಿದೆ. ಇವರು ಕಾರ್ಪೋರೇಟ್ ಕಂಪನಿಗಳ ಪರವೇ ಹೊರತು, ಜನಸಾಮಾನ್ಯ ರೈತರ ಪರವಾದವರಲ್ಲ ಎಂದು ಅವರು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಭೂಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿ ಕಳೆದ ಎರಡ್ಮೂರು ದಿನಗಳಿಂದ ರೈತ ಪರ ಸಂಘಟನೆಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ.