ಪುತ್ತೂರು ಬಸ್ಸು ನಿಲ್ದಾಣದ ಬಳಿಯಲ್ಲಿ ಎಸ್‍ಡಿಪಿಐ ಪ್ರತಿಭಟನೆ…..

ಪುತ್ತೂರು: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಜನವಿರೋಧಿ ಕಾನೂನುಗಳು ಹಾಗೂ ಜನವಿರೋಧಿ ನೀತಿಗಳ ಮೂಲಕ ನಿರಂತರವಾಗಿ ಜನತೆಯನ್ನು ಶೋಷಣೆ ಮಾಡುವುದರಲ್ಲಿ ತಲ್ಲೀನವಾಗಿವೆ. ದೇಶದಲ್ಲಿ ಬದಲಾವಣೆ ತರುತ್ತೇವೆ, ಅಚ್ಚೇದಿನ್ ತರುತ್ತೇವೆ ಎಂದು ಜನತೆಯಲ್ಲಿ ಕನಸು ಬಿತ್ತಿ ಶೋಷಣೆ ಮಾಡಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಹೊಸ ನೀತಿ ಹಾಗೂ ಕಾನೂನುಗಳ ಮೂಲಕ ಹಿಂದುತ್ವದ ಫ್ಯಾಸಿಸ್ಟ್ ಮನೋಸ್ಥಿತಿಯನ್ನು ಜಾರಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಎಸ್‍ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಆರೋಪಿಸಿದರು.
ಪುತ್ತೂರು ನಗರದ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಕೇಂದ್ರ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ, ರಾಷ್ಟ್ರೀಯ ಮತ್ತು ರಾಜ್ಯ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಎಸ್‍ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಎಸ್‍ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್, ಎಸ್‍ಡಿಟಿಯು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ, ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಇಬ್ರಾಹಿಂ ಸಾಗರ್, ಪಕ್ಷದ ಪ್ರಮುಖರಾದ ಅಬ್ದುಲ್ ಹಮೀದ್ ಸಾಲ್ಮರ, ಶಾಕೀರ್ ಅಳಕೆಮಜಲು,ಹಮೀದ್ ಹಾಜಿ ಮೆಜೆಸ್ಟಿಕ್, ಅಜೀಜ್ ಕಬಕ, ಅಶ್ರಫ್ ಬಾವು, ಯಾಹ್ಯಾ ಕೂರ್ನಡ್ಕ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಭಟನೆಯ ಬಳಿಕ ಎಸ್‍ಡಿಪಿಐ ಮುಖಂಡರು ಪುತ್ತೂರಿನ ಮಿನಿವಿಧಾನ ಸೌಧಕ್ಕೆ ನಿಯೋಗದಲ್ಲಿ ತೆರಳಿ ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button