ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತು ಪೋಷಕರ ಸಮಾಲೋಚನ ಸಭೆ…

ಪುತ್ತೂರು: ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಅವರ ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತು ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲೇಜಿನ ಚಟುವಟಿಕೆಗಳ ಬಗ್ಗೆ ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪಠ್ಯ ಶಿಕ್ಷಕರನ್ನು ಸಂಪರ್ಕಿಸುವುದು ವಿದ್ಯಾರ್ಥಿಯ ಕರ್ತವ್ಯ ಎಂದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳಿಂದಾಗುವ ಹಾನಿಯ ಬಗ್ಗೆ ಮನವರಿಕೆ ಮಾಡಬೇಕು, ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ ನೀಡಿ ವಿಭಾಗ ಮುಖ್ಯಸ್ಥರೊಂದಿಗೆ ಮತ್ತು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಮಾತನಾಡಿ ಪೋಷಕರು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಂಸ್ಥೆ ಇದರ ನಡುವಿನ ಬಾಂಧವ್ಯವು ಗಟ್ಟಿಯಾದಷ್ಟು ಸಂಸ್ಥೆ ಬೆಳೆಯುತ್ತದೆ. ತನ್ಮೂಲಕ ಅಲ್ಲಿ ಕಲಿಯುವ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಕಾರಣವಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ಹೊಸ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು.
ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿದರು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ಸತ್ಯನಾರಾಯಣ ಭಟ್ ಮತ್ತು ಸಂತೋಶ್ ಕುತ್ತಮೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿದರು. ಪ್ರೊ.ತೇಜಸ್ವಿನಿ.ಎಲ್.ಪಿ ಪ್ರಸ್ತಾವನೆಗೈದರು. ಪೇರೆಂಟ್ ರಿಲೇಶನ್ ಸೆಲ್‍ನ ಸಂಯೋಜಕಿ ಪ್ರೊ.ಶ್ರೀಶರಣ್ಯ ಯು ಆರ್ ವಂದನಾರ್ಪಣೆಗೈದರು. ಪ್ರೊ.ಸೌಜನ್ಯ.ಎಂ.ಎಂ ಹಾಗೂ ಪ್ರೊ.ನಿಖಿಲಾ ಟಿ ಕಾರ್ಯಕ್ರಮ ನಿರ್ವಹಿಸಿದರು.

pta fy 2023 24

Sponsors

Related Articles

Back to top button